Home » 24/7 ನಿರಂತರ ಕುಡಿಯುವ ನೀರು ಪೂರೈಕೆ ಕಾಮಗಾರಿ ಚುರುಕುಗೊಳಿಸಿ ಜನಪ್ರತಿನಿಧಿಗಳ ಸಲಹೆ ಪಡೆದು ಯೋಜನೆ ಅನುಷ್ಠಾನಗೊಳಿಸಿ: CM

24/7 ನಿರಂತರ ಕುಡಿಯುವ ನೀರು ಪೂರೈಕೆ ಕಾಮಗಾರಿ ಚುರುಕುಗೊಳಿಸಿ ಜನಪ್ರತಿನಿಧಿಗಳ ಸಲಹೆ ಪಡೆದು ಯೋಜನೆ ಅನುಷ್ಠಾನಗೊಳಿಸಿ: CM

by manager manager

ಹುಬ್ಬಳ್ಳಿ, ಸೆ.04: ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಿಗೆ 24/7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿ ಚುರುಕುಗೊಳ್ಳಬೇಕು.ಗುತ್ತಿಗೆ ಪಡೆದಿರುವ ಸಂಸ್ಥೆಯು ಸ್ಥಳೀಯ ಜನಪ್ರತಿನಿಧಿಗಳ ಸಲಹೆ,ಸಹಕಾರ ಪಡೆದು ಜಲ ಸಂಗ್ರಹಾಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಡೆನಿಸನ್ಸ್ ಹೋಟೆಲಿನಲ್ಲಿ ಇಂದು ಸಂಜೆ ಅವಳಿನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಎಲ್ ಆ್ಯಂಡ್ ಟಿ ಸಂಸ್ಥೆಯು ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಗತಿ ಮಾಹಿತಿ ನೀಡಬೇಕು.ಅರ್ಪಣಾ ಮನೋಭಾವದಿಂದ ಕೆಲಸ ಮಾಡಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು.ಕೂಡಲೇ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಬೇಕು ಯೋಜನೆಯ ಅನುಷ್ಠಾನಕ್ಕೆ ಇದು ಸಹಾಯವಾಗಲಿದೆ.ಕೆಯುಐಡಿಎಫ್‌ಸಿ ಹಾಗೂ ಎಲ್ ಆ್ಯಂಡ್ ಟಿ ಸಂಸ್ಥೆಗಳು ಜಂಟಿಯಾಗಿ ನ್ಯಾಯಾಲಯಕ್ಕೆ ಉತ್ತರ ನೀಡಲಿ.ಆಡಳಿತ ವ್ಯವಸ್ಥೆ,ಹಣಕಾಸು ನಿರ್ವಹಣೆಯಲ್ಲಿ ವಿಕೇಂದ್ರೀಕರಣ ಮಾಡಿ ತ್ವರಿತತೆ ತರಬೇಕು.ಇದು ಯಾವುದೇ ಕಟ್ಟಡ ಕಾಮಗಾರಿಯಲ್ಲ.ಎಲ್ಲಾ ಸಾರ್ವಜನಿಕರಿಗೆ ಅಗತ್ಯವಾಗಿರುವ ಕುಡಿಯುವ ನೀರಿನ ಯೋಜನೆಯಾಗಿದೆ. ಗುತ್ತಿಗೆ ಸಂಸ್ಥೆಯು ತನ್ನ ಸಮಸ್ಯೆಗಳನ್ನು ನಿರ್ವಹಿಸಿಕೊಳ್ಳುವ ಸಾಮರ್ಥ್ಯದೊಂದಿಗೆ ಮುನ್ನಡೆಯಬೇಕು.ಜಿಲ್ಲಾಡಳಿತ ,ಸರ್ಕಾರವೂ ಆ ನಿಟ್ಟಿನಲ್ಲಿ ಸಹಕರಿಸಲಿದೆ.ಅನುಷ್ಠಾನ ತೃಪ್ತಿಕರವಾಗಿರದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ.ಅಂತಹ ಕ್ರಮಗಳಿಗೆ ಅವಕಾಶ ನೀಡಬೇಡಿ ಎಂದು ಮುಖ್ಯಮಂತ್ರಿಯವರು ಎಚ್ಚರಿಸಿದರು. ನಿರ್ವಹಣೆಯ ಜವಬ್ದಾರಿ ತಕ್ಷಣ ತೆಗೆದುಕೊಳ್ಳಬೇಕು ಎಂದು ಸಂಸ್ಥೆಗೆ ಸೂಚಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮಾತನಾಡಿ, ಇದು ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ.ಅನುಷ್ಠಾನದಲ್ಲಿ ಉದಾಸೀನ ಮನೋಭಾವ ತಾಳಬಾರದು.ಕೆಲವೆಡೆ 6 ರಿಂದ 8 ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿರುವ ಬಗ್ಗೆ ನಾಗರಿಕರಿಂದ ದೂರುಗಳು ಬರುತ್ತಿವೆ.ಕೆಯುಡಿಎಫ್‌ಸಿ ಹಾಗೂ ಎಲ್ ಆ್ಯಂಡ್ ಟಿ ಸಂಸ್ಥೆಗಳು ಪರಸ್ಪರ ಸಮನ್ವಯದೊಂದಿಗೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಗಣಿ,ಭೂವಿಜ್ಞಾನ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್,ಕೈಮಗ್ಗ,ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ,ಮಾಜಿ ಮುಖ್ಯಮಂತ್ರಿ,ಶಾಸಕ ಜಗದೀಶ ಶೆಟ್ಟರ್,ಶಾಸಕರಾದ ಅರವಿಂದ ಬೆಲ್ಲದ,ಅಮೃತ ದೇಸಾಯಿ,ಪ್ರಸಾದ ಅಬ್ಬಯ್ಯ,ಸಿ.ಎಂ.ನಿಂಬಣ್ಣವರ,ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,ಎಸ್.ವಿ.ಸಂಕನೂರ,ಪ್ರದೀಪ ಶೆಟ್ಟರ್,ಮಹಾನಗರಪಾಲಿಕೆ ಮೇಯರ್ ಈರೇಶ ಅಂಚಟಗೇರಿ , ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್, ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕಿ ದೀಪಾ ಚೋಳನ್,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ,ಮಹಾನಗರಪಾಲಿಕೆ ಆಯುಕ್ತ ಡಾ.ಬಿ‌.ಗೋಪಾಲಕೃಷ್ಣ ಇತರರು ಉಪಸ್ಥಿತರಿದ್ದರು.